ಅನುದಾನವನ್ನು ರಾಜ್ಯ ಸರ್ಕಾರ ಖರ್ಚು ಮಾಡಿಲ್ಲ ಎಂದ ಕೇಂದ್ರ ಕೃಷಿ ಸಚಿವ
ಬೆಂಗಳೂರು ನಗರರಾಜಕೀಯ


ಬೆಂಗಳೂರು:
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ಕೊಡ್ತೇವೆ. ಬಿಡುಗಡೆ ಮಾಡಿರುವ ಹಾಗೂ ಘೋಷಣೆ ಮಾಡಿರುವ ಅನುದಾನ ಸದ್ಬಳಕೆ ಆಗಲಿ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ರರು.
ಬೆಂಗಳೂರಿಗೆ ಬಂದಿರುವ ಕೇಂದ್ರ ಕೃಷಿ ಸಚಿವರು ಇಂದು ರಾಜ್ಯದ ಸಚಿವರನ್ನು ಭೇಟಿ ಮಾಡಿ ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಮುಂದಿನ ಗುರಿ-ಸವಾಲುಗಳ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದರು.
ಕೊಟ್ಟ ಅನುದಾನ ಖರ್ಚು ಮಾಡಿಲ್ಲ
ಇನ್ನು ಸಚಿವರ ಭೇಟಿ ಬಳಿಕ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಅವರು ಅನುದಾನ ಕೇಳದಿದ್ರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಖರ್ಚು ಮಾಡಿಲ್ಲ ಎಂದರು.
ಬಡಜನರಿಗೆ ಮನೆ ಕಟ್ಟಲು ಟಾರ್ಗೆಟ್ ಹೆಚ್ಚಳ
ಪ್ರತಿ ಬಡವನಿಗೂ ಮನೆ ಸಿಗಬೇಕು ಅನ್ನೋದು ಮೋದಿಯವರ ಸಂಕಲ್ಪ. ಕಳೆದ ಸೆಪ್ಟೆಂಬರ್ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ವಿ, ಅನುದಾನವನ್ನೂ ಕೊಟ್ಟಿದ್ವಿ. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಟಾರ್ಗೆಟ್ ಹೆಚ್ಚಿಸಲಾಗಿದೆ. ಇದಕ್ಕಾಗಿ ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ. ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಹಣ ಬಿಡುಗಡೆ
ಇಂದು ಅಡಿಕೆ ಬೆಳಗಾರರ ಸಮಸ್ಯೆಗಳ ಪರಿಹಾರಕ್ಕೆ ಅನುದಾನ ಕೋರಲಾಯಿತು. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ 89 ಕೋಟಿ ರೂ ಬಿಡುಗಡೆ ಮಾಡುತ್ತಿದ್ದೇವೆ. ಮೂರೂ ಸಚಿವರೂ ಒಂದಷ್ಟು ಬೇಡಿಕೆ ಕೊಟ್ಟಿದ್ದಾರೆ, ಅದನ್ನೂ ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದು ತಿಳಿಸಿದರು.